ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರಿಂದ ರಾಷ್ಟ್ರ ಧ್ವಜಾರೋಹಣ || ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರಶಸ್ತಿ ಪತ್ರಗಳ ವಿತರಣೆ ||
ಹೊಸಶಕೆ ನ್ಯೂಸ್-ಕೊಪ್ಪಳ : ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ನಮ್ಮ ಪ್ರದೇಶವಾದ ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಎಲ್ಲಾ ಸ್ವಾತಂತ್ರ್ಯ ಸೇನಾನಿಗಳನ್ನು ನಾವು ಸ್ಮರಿಸಿ ಗೌರವಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಪಡೆದು 1947ರ ಆಗಸ್ಟ್ 15ಕ್ಕೆ ತನ್ನ ಸಂಭ್ರಮದ ಹಬ್ಬ ಆಚರಿಸಿದರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದ್ರಾಬಾದ್ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತಕ್ಕೆ ಸ್ವಾತಂತ್ರ್ಯ ಅಧಿಕೃತವಾಗಿ ಬಂದರೂ, ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು ಎಂದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಕಲ್ಯಾಣ ಕರ್ನಾಟಕ ಪ್ರದೇಶವು ವಚನ ಕ್ರಾಂತಿಯ ಮೂಲಕ ಬಹುದೊಡ್ಡ ಹೆಸರು ಪಡೆಯಿತು. ನಮ್ಮ ದೇಶದಲ್ಲಿ ಸ್ವಾತಂತ್ರ್ಯ ಹೋರಾಟವು ಹೇಗೆ ನಡೆಯಿತೋ ಅದೇ ರೀತಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹೋರಾಟವು ಸಹ ನಡೆಯಿತು. ರಜಾಕರ ಪಡೆಯು ಜನಸಾಮಾನ್ಯರ ಮೇಲೆ ನಿರಂತರವಾಗಿ ಅನ್ಯಾಯ, ದೌರ್ಜನ್ಯ ಮಾಡುತ್ತಿತ್ತು. ಇದನ್ನು ಸಹಿಸದೆ ಈ ಭಾಗದಲ್ಲಿ ಹೋರಾಟಗಳು ನಡೆದವು ಎಂದರು.
ನಿಜಾಮರ ವಿರುದ್ಧ ಹೋರಾಡಲು ನಮ್ಮ ಭಾಗದ ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಹೋರಾಟ ಸಮಿತಿ ರಚಿಸುತ್ತಾ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಶಿಬಿರಗಳನ್ನು ತೆರೆದರು. ಕಲಬುರ್ಗಿ ಭಾಗದಲ್ಲಿ ಸರದಾರ್ ಶರಣಗೌಡ ಇನಾಂದಾರ, ರಾಮಚಂದ್ರ ವೀರಪ್ಪ ಇವರ ನೇತೃತ್ವದಲ್ಲಿ ಹಾಗೂ ಕೊಪ್ಪಳ ಭಾಗದಲ್ಲಿ ಅಳವಂಡಿ ಶಿವಮೂರ್ತಿ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ಆರಂಭವಾಯಿತು ಎಂದು ಹೇಳಿದರು.
ಅಳವಂಡಿ ಶಿವಮೂರ್ತಿ ಸ್ವಾಮಿಗಳು ಕ್ಯಾಂಪಿನ ಅಧ್ಯಕ್ಷರಾಗಿ ಮುಂಡರಗಿಯಲ್ಲಿ ಶಿಬಿರ ತೆರೆದರು. ಶಿಬಿರದಲ್ಲಿ ಪುಂಡಲೀಕಪ್ಪ ಜ್ಞಾನ ಮೋಠೆರವರು, ವೀರಭದ್ರಪ್ಪ ಶಿರೂರುರವರು, ಸಿ.ಎಂ. ಚರ್ಚಿಹಾಳ ಮಠರವರು, ಸೋಮಪ್ಪ ಡಂಬಳರವರು, ಯರಾಶಿ ಶಂಕ್ರಪ್ಪನವರು, ಎಂ.ವಿರುಪಾಕ್ಷಪ್ಪನವರು, ನರಸಿಂಗರಾವ್, ಜನಾರ್ಧನರಾವ್ ದೇಸಾಯಿ, ಡಾ. ದೇವೇಂದ್ರಕುಮಾರ ಹಕಾರಿ, ಡಾ. ಪಂಚಾಕ್ಷರಿ ಹಿರೇಮಠ ಹಾಗೂ ಇನ್ನೂ ಹಲವರು ಈ ಭಾಗದ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ದೊರೆಯಿತು ಎಂದರು
ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿರುವುದರಿಂದ ಹಾಗೂ ರಾಷ್ಟ್ರದ ಸಾರ್ವಭೌಮತ್ವದ ಹಿತದೃಷ್ಟಿಯಿಂದ ಉಕ್ಕಿನ ಮನುಷ್ಯರೆಂದೇ ಹೆಸರಾಗಿರುವ ಸರ್ದಾರ್ ವಲ್ಲಭ ಬಾಯಿ ಪಟೇಲರ ದಿಟ್ಟತನದಿಂದ ಕೈಗೊಂಡ ಸೈನಿಕ ಕಾರ್ಯಾಚರಣೆಯಲ್ಲಿ, ನಿಜಾಮನು ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ 1948ರ ಸೆಪ್ಟೆಂಬರ್ 17 ರಂದು ಈ ಭಾಗಗಳು ರಾಜ್ಯದ ಇತರ ಭಾಗಗಳಂತೆ ಸ್ವತಂತ್ರ್ಯವಾಗಿ ಉಸಿರಾಡಲು ಸಾಧ್ಯವಾಯಿತು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗವು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು 77 ವರ್ಷಗಳನ್ನು ಪೂರೈಸಿ 78ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಈ ಉತ್ಸವದಲ್ಲಿ ಪಾಲ್ಗೊಳ್ಳಲು ನನಗೆ ತುಂಬಾ ಸಂತೋಷವೆನಿಸುತ್ತಿದೆ. ಇದಕ್ಕಾಗಿ ಹೋರಾಡಿದ ಎಲ್ಲಾ ಮಹನಿಯರಿಗೆ ಗೌರವ ವಂದನೆಗಳನ್ನು ಸಲ್ಲಿಸಿದರು,
ಸರ್ಕಾರದ ಯೋಜನೆ-ಕಾರ್ಯಕ್ರಮಗಳು ಹಾಗೂ ಜಿಲ್ಲೆಯಲ್ಲಿ ಸಾಧನೆ ಕುರಿತು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ವಿವಿಧ ಎನ್.ಸಿ.ಸಿ, ಭಾರತ ಸ್ಕೌಟ್ಸ್ & ಗೈಡ್ಸ್, ಭಾರತ ಸೇವಾದಳ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
*ಆಕರ್ಷಕ ಪಥಸಂಚಲನ:* 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
*ಲ್ಯಾಪ್ಟಾಪ್ ವಿತರಣೆ:* ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಪ್ರವೇಶ ಪಡೆದಿರುವ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಮಹತ್ವಾಕಾಂಕ್ಷಿ ಜಿಲ್ಲೆಯ ವಿವಿಧ ತಾಲ್ಲೂಕುಗಳಡಿಯಲ್ಲಿ ಬರುವ ಸರಕಾರಿ ಪಾಲಿಟೆಕ್ನಿಕ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 23 ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ಗಳನ್ನು ವಿತರಿಸಲಾಯಿತು.
*ಸಾಂಸ್ಕೃತಿಕ ಕಾರ್ಯಕ್ರಮ, ಪ್ರಶಸ್ತಿ ಪತ್ರಗಳ ವಿತರಣೆ:* ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಕೊಪ್ಪಳದ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಮತ್ತು ಕಾಳಿದಾಸ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಥಸಂಚಲನದಲ್ಲಿ ಭಾಗವಹಿಸಿದ ತಂಡಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ, ಸನ್ಮಾನಿಸಲಾಯಿತು.
==ಹೋರಾಟಗಾರರ ತ್ಯಾಗ ಬಲಿದಾನಗಳಿಂದ ಹೈದ್ರಾಬಾದ್– ಕರ್ನಾಟಕ ವಿಮೋಚನಾ ಹೋರಾಟವು ಈ ನಾಡಿನ ಭವ್ಯ ಇತಿಹಾಸವಾಗಿ ಉಳಿದಿದೆ, ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿ ತಂದಿದೆ. ಮಂಡಳಿ ಮೂಲಕ ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಸರ್ವರಿಗು ಸಮಬಾಳು ಸರ್ವರಿಗು ಸಮಪಾಲು ಎನ್ನುವ ಸಾಮಾಜಿಕ ನ್ಯಾಯದ ಪರಿಪಾಲನೆಯನ್ನು ನಾವು ಮಾಡಿದ್ದೇವೆ : ಶಿವರಾಜ ತಂಗಡಗಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು.
