ಹೊಸಶಕೆ ನ್ಯೂಸ್-ಕೊಪ್ಪಳ : ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್. 28 ರಂದು ಕಂದಾಯ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಿನ್ನಾಳ ಗ್ರಾಮದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕೊಪ್ಪಳದ ಮಹಾಂತೇಶ್ ಎಸ್. ದರಗದ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಕಿನ್ನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಕಂದಾಯ ಅದಾಲತ್ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಿನ್ನಾಳ ಗ್ರಾಮವನ್ನು ದತ್ತು ಪಡೆದ ನಂತರ ಈ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಏಪ್ರಿಲ್. 28 ರಂದು ಬೆಳಿಗ್ಗೆ 10 ಗಂಟೆಗೆ ಕಿನ್ನಾಳ ಗ್ರಾಮ ಪಂಚಾಯತಿಯಲ್ಲಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್ನಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ದಾಪ್ಯವೇತನ, ಅಂಗವಿಕಲರ ವೇತನ, 371 ಜೆ ಪ್ರಮಾಣ ಪತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ ವತಿಯಿಂದ ಉದ್ಯೋಗ ಖಾತ್ರಿ ಕಾರ್ಡಗಳ ವಿತರಣೆ, ಜನನ ಮರಣ ಪ್ರಮಾಣ ಪತ, ಇ- ಸ್ವತ್ತಿನ ದಾಖಲಾತಿ ಹಾಗೂ ನಿರಾಪೇಕ್ಷಣ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಈ ಕಂದಾಯ ಅದಾಲತನಲ್ಲಿ ಸಾರ್ವಜನಿಕರು ಮಾಹಿತಿ ಪಡೆಯಬಹುದಾಗಿದೆ ಎಂದರು.
ಕಂದಾಯ ಅದಾಲತನಲ್ಲಿ ಕೊಪ್ಪಳ ತಹಶಿಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎ.ಡಿ.ಎಲ್.ಆರ್, ಆರ್.ಐ, ವಿ.ಎ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವುದರಿಂದ ಕಿನ್ನಾಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಂದಾಯ ಅದಾಲತನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಹನೀಫ್. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ಸುರೇಶ ಜಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.