ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಪರವಾನಗಿ ರದ್ದು– ಸಚಿವ ತಂಗಡಗಿ ಖಡಕ್ ಎಚ್ಚರಿಕೆ
ಹೊಸಶಕೆ ನ್ಯೂಸ್-ಕೊಪ್ಪಳ:ಜಿಲ್ಲೆಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದುಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ರಸಗೊಬ್ಬರ ಮಾರಾಟಗಾರರಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸಗೊಬ್ಬರ ಮಾರಾಟಗಾರರು ಅನಧಿಕೃತವಾಗಿ ರಸಗೊಬ್ಬರವನ್ನು ಸಂಗ್ರಹಿಸಿಇಟ್ಟುಕೊಂಡು ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸುವುದು ಮತ್ತು ನಿಗದಿತ ದರಕ್ಕಿಂತ ಒಂದೇ ಒಂದು ರೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿ ನಿಲ್ಲುವಂತೆ ಮಾಡಿ ಬೇಡಿಕೆ ಹೆಚ್ಚಾಗಿದೆ ಎನ್ನುವಂತೆ ಬಿಂಬಿಸುವ ಕೆಲಸ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು. ಜಿಲ್ಲೆಯಲ್ಲಿ ರಸಗೊಬ್ಬರ ಸುಸೂತ್ರವಾಗಿ ವಿತರಣೆಯಾಗುವ ಸಂಬಂಧ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿಗಾವಹಿಸಲಿದ್ದು ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳನ್ನೊಳಗೊಂಡು ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುತ್ತಿದೆ ಎಂದರು.
ರಸಗೊಬ್ಬರ ಪೂರೈಕೆ ಬಗ್ಗೆ ರೈತರು ಯಾರು ಆತಂಕ ಪಡಬೇಕಾಗಿಲ್ಲ. ರೈತರು ತಮ್ಮ ಅವಶ್ಯಕತೆ ತಕ್ಕಂತೆ ರಸಗೊಬ್ಬರ ತೆಗೆದುಕೊಳ್ಳಬೇಕು. ಯಾರು ಆತಂಕಕ್ಕೆ ಒಳಗಾಗಿ ಮೊದಲೆ ರಸಗೊಬ್ಬರ ಸಂಗ್ರಹಕ್ಕೆ ಮುಂದಾಗುವ ಅಗತ್ಯ ಇಲ್ಲ. ಈ ತಿಂಗಳ 31 ರವರೆಗೆ 800 ಮೆಟ್ರಿಕ್ ಟನ್ ಹಾಗೂ ಆಗಸ್ಟ್ 1 ಮತ್ತು 3ರವರೆಗೆ ತಲಾ 1200 ಮೇಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಗೆ ಬರಲಿದೆ. ಹಾಗಾಗಿ ಈ ಮಾಹಿತಿಯನ್ನು ರೈತರಿಗೆ ತಿಳಿಸಬೇಕೆಂದು ರಸಗೊಬ್ಬರ ವಿತರಕರಿಗೆ ಸಚಿವರು ಹೇಳಿದರು.
ಜಿಲ್ಲೆಯಲ್ಲಿ ನಕಲಿ ಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಸಹಿಸುವುದಿಲ್ಲ. ಈಗಾಗಲೇ ಒಂದು ನಕಲಿ ಗೊಬ್ಬರ ಮಾರಾಟ ಪ್ಯಾಕ್ಟರಿ ಬಂದ್ ಮಾಡಲಾಗಿದೆ. ರೈತರಿಗೆ ಹಾನಿಯಾದರೆ ನಾವು ಸಹಿಸಿಕೊಳ್ಳುವುದಿಲ್ಲ. ರೈತರು ಯಾರು ಜಿಲ್ಲೆಯಲ್ಲಿ ಆತಂಕ ಪಡಬೇಕಿಲ್ಲ. ಆಗಸ್ಟ್ ತಿಂಗಳಲ್ಲಿ ನಮಗೆ ಸಾಕಾಗುವಷ್ಟು ರಸಗೊಬ್ಬರ ಜಿಲ್ಲೆಗೆ ಬರಲಿದೆ. ರೈತರಿಗೆ ಸರಿಯಾಗಿ ರಸಗೊಬ್ಬರ ವಿತರಣೆಯಾಗುತ್ತಿರುವ ಮಾಹಿತಿಯನ್ನು ಕೃಷಿ ಇಲಾಖೆಯ ಅಧಿಕಾರಿಗಳು ಆಗಾಗ ನನಗೆ ನೀಡಬೇಕೆಂದು ಸೂಚನೆ ನೀಡಿದರು.