*ಈ ನೆಲದ ಅಪ್ರತಿಮ ಹೋರಾಟಗಾರರ ಛಲದಿಂದ ಈ ಪ್ರದೇಶವು ಒಕ್ಕೂಟ ವ್ಯವಸ್ಥೆಗೆ ಸೇರುವಂತಾಯಿತು ||
ಹೊಸಶಕೆ ನ್ಯೂಸ್-ಕಲಬುರ್ಗಿ : 1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ್ಯ ಪಡೆದ ಸಂಭ್ರಮದಲ್ಲಿದ್ದರೆ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆತಿರಲಿಲ್ಲ. ರಜಾಕಾರರ ದೌರ್ಜನ್ಯ ಮಿತಿ ಮೀರಿತ್ತು. ತ್ಯಾಗ ಬಲಿದಾನಗಳಿಗೆ ಹೆಸರುವಾಸಿಯಾದ ಈ ನೆಲದ ಅಪ್ರತಿಮ ಹೋರಾಟಗಾರರ ಛಲ ಮತ್ತು ಜವಾಹರ್ ಲಾಲ್ ನೆಹರೂ ಹಾಗೂ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ದೃಢ ನಿಶ್ಚಯದಿಂದಾಗಿ ಒಕ್ಕೂಟ ವ್ಯವಸ್ಥೆಗೆ ಸೇರುವಂತಾಯಿತು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು
78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಜೊತೆಗೆ ಹೈದ್ರಾಬಾದ್ ಕರ್ನಾಟಕ ವಿಮೋಚನೆಗಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗವನ್ನು ಭಾರತದಲ್ಲಿ ವಿಲೀನಗೊಳಿಸಲು ನಡೆದ ಹೋರಾಟದಲ್ಲಿ ಭಾಗವಹಿಸಿದ್ದ ಶರಣಗೌಡ ಇನಾಂದಾರ, ರಾಜಾ ವೆಂಕಟಪ್ಪ ನಾಯಕ, ದತ್ತಾತ್ರೇಯ ಅವರಾದಿ, ಶಿವಮೂರ್ತಿಸ್ವಾಮಿ ಅಳವಂಡಿ, ಮಟಮಾರಿ ನಾಗಪ್ಪ, ನಾರಾಯಣರಾವ್ ಕನಿಹಾಳ, ಹಕೀಕತ್ರಾವ್ ಚಿಟಗುಪ್ಪಕರ, ಚಂದ್ರಶೇಖರ್ ಪಾಟೀಲ್, ರಾಮಾಚಾರ್, ಡಾ. ಚರ್ಚಿಹಾಳ್ ಮಠ, ರಾಮಚಂದ್ರ ವೀರಪ್ಪ, ಕಪತಪ್ಪ ಬೇಳೆ, ಎ.ವಿ.ಪಾಟೀಲ್, ಆರ್.ವಿ. ಬಿಡ್ಡಪ್ಪ, ಅಮರ್ ಸಿಂಗ್ ರಾಠೋಡ್ ಮುಂತಾದ ಎಲ್ಲಾ ಹೋರಾಟಗಾರರ ತ್ಯಾಗ ಬಲಿದಾನ ಅವಿಸ್ಮರಣೀಯ. ಇಂತಹ ಅಸಂಖ್ಯಾತ ಹೋರಾಟಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಕಲ್ಯಾಣ ಕರ್ನಾಟಕವು ಸಾಹಿತ್ಯ, ಕಲೆ, ಸಂಸ್ಕೃತಿ, ಧಾರ್ಮಿಕ ಸುಧಾರಣೆ ಮೊದಲಾದ ಕ್ಷೇತ್ರಗಳಲ್ಲಿ ಇಡೀ ದೇಶಕ್ಕೆ ಬೆಳಕು ಚೆಲ್ಲಿದಂತಹ ಶ್ರೇಷ್ಠ ವ್ಯಕ್ತಿಗಳನ್ನು ಜಗತ್ತಿಗೆ ನೀಡಿದೆ. ಕನ್ನಡದ ಮೊಟ್ಟ ಮೊದಲ ಉಪಲಬ್ಧ ಗ್ರಂಥ ಕವಿರಾಜಮಾರ್ಗದಲ್ಲಿ `ನಿಜವಾದ ಒಡವೆ ಎಂದರೆ ಪರಧರ್ಮ ಮತ್ತು ಪರರ ವಿಚಾರಗಳನ್ನು ಸಹನೆಯಿಂದ ನೋಡುವುದು’ ಎಂಬ ಶಾಶ್ವತ ಸೌಹಾರ್ದ ತತ್ವವನ್ನು ಜಗತ್ತಿಗೆ ನೀಡಲಾಗಿದೆ ಎಂದು ಹೇಳಿದರು.
ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರ ನೇತೃತ್ವದ ಶರಣರ ಚಳುವಳಿಯು ಇದೇ ಪುಣ್ಯಭೂಮಿಯಲ್ಲಿ ನಡೆದಿತ್ತು ಎಂಬುದು ಇಡೀ ಜಗತ್ತು ಹೆಮ್ಮೆ ಪಡುವ ಸಂಗತಿಯಾಗಿದೆ. ಉದಾತ್ತ ಪರಂಪರೆಗೆ ನಾಂದಿ ಹಾಡಿದ್ದ ಅಸಂಖ್ಯಾತ ಅನುಭಾವಿಗಳು, ಅವಧೂತರು, ಆರೂಢರು, ಸೂಫಿಸಂತರ ಕರ್ಮಭೂಮಿ ಇದು. .ಸ್ವತಂತ್ರ ಭಾರತವು ಅಭಿವೃದ್ಧಿ ಮಾರ್ಗದ ಕಡೆಗೆ ಮುನ್ನಡೆಯುತ್ತಿದ್ದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅಭಿವೃದ್ಧಿ ಕಾಣದೆ ಅಂಧಕಾರದಲ್ಲೆ ಉಳಿದು ಬಿಟ್ಟಿದ್ದವು.
ಸಂವಿಧಾನಬದ್ಧವಾಗಿ ನಾವೂ ಅಭಿವೃದ್ಧಿ ಹೊಂದಬೇಕೆಂಬ ಸಂಕಲ್ಪ ಮೂಡಿದ ಕಾರಣದಿಂದಲೇ ಹೋರಾಟಗಳು ಹುಟ್ಟಿಕೊಂಡವು. ಹಿಂದುಳಿದಿದ್ದ ಈ ಭಾಗವನ್ನು ಅಭಿವೃದ್ಧಿ ಮಾಡಬೇಕೆಂಬ ಉದ್ದೇಶದಿಂದ ಸನ್ಮಾನ್ಯ ದಿವಂಗತ ಡಾ. ಧರ್ಮಸಿಂಗ್ರವರ ನೇತೃತ್ವದ ಸಮಿತಿಯ ವರದಿ ಆಧರಿಸಿ, 1990ರಲ್ಲಿ ಹೈದ್ರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.
==ಅಭಿವೃದ್ಧಿ ಸಾಧ್ಯವಾಗಬೇಕಾದರೆ ವಿಶೇಷ ಸ್ಥಾನಮಾನದ ಅಗತ್ಯವಿದೆಯೆಂದು ಈ ಭಾಗದ ಹೋರಾಟಗಾರರು ನಿರಂತರವಾಗಿ ಹೋರಾಟ ನಡೆಸಿದ್ದರು. ಕೇಂದ್ರದ ಅಟಲ್ ಬಿಹಾರಿ ವಾಜಪೇಯಿಯವರ ನೇತೃತ್ವದ ಸರ್ಕಾರವು ಕಲ್ಯಾಣ ಕರ್ನಾಟಕಕ್ಕೆ ನೀಡಬೇಕಾದ ವಿಶೇಷ ಸ್ಥಾನಮಾನವನ್ನು ಕೊಡಲಾಗುವುದಿಲ್ಲವೆಂದು ಬಹುಕಾಲದ ಜನರ ಬೇಡಿಕೆಯನ್ನು ತಿರಸ್ಕರಿಸಿತ್ತು. ಆದರೆ ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸದೆ ದೇಶದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನರಿತ ಡಾ. ಮನಮೋಹನ್ ಸಿಂಗ್ರವರ ನೇತೃತ್ವದ ಯು.ಪಿ.ಎ. ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಟಿಕಲ್ 371ಜೆ ಅನ್ನು ದಿನಾಂಕ 1-1-2013 ರಿಂದ ಜಾರಿಗೆ ಬರುವಂತೆ ಅಧಿಸೂಚನೆಗಳನ್ನು ಹೊರಡಿಸಿತು. ವಿಶೇಷ ಸ್ಥಾನಮಾನಕ್ಕಾಗಿ ನಡೆದ ಹೋರಾಟಗಳ ಮುಖಂಡತ್ವ ವಹಿಸಿದ್ದ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಯವರು, ಮಾನ್ಯ ದಿವಂಗತ ಧರ್ಮಸಿಂಗ್ ರವರು ಮುಂತಾದ ಅನೇಕ ಮಹನೀಯರ ಹೋರಾಟವನ್ನು ನಾವು ಮರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
