ಹೊಸಶಕೆ ನ್ಯೂಸ್-ಕೊಪ್ಪಳ:
ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪ ಸಮಿತಿ ಕೊಪ್ಪಳ ವಿಶ್ವವಿದ್ಯಾಲಯವನ್ನು ಒಳಗೊಂಡು ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ದುರಂತದ ಸಂಗತಿ ಎಂದು ಬಿಜೆಪಿ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷರಾದ ನವೀನಕುಮಾರ ಗುಳಗಣ್ಣನವರ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಉನ್ನತ ಶಿಕ್ಷಣ ಗ್ರಾಮೀಣ ಬಾಗಕ್ಕೂ ವಿಸ್ತರಿಸಲು ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವ ಮೂಲಕ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿತ್ತು.
ನೂತನ ವಿಶ್ವವಿದ್ಯಾಲಯಗಳಿಗೆ ಆರ್ಥಿಕ ಸಹಾಯ ಮಾಡಿ ಉತ್ತೇಜಿಸಬೇಕಾಗಿದ್ದ ಸರ್ಕಾರ ಇವತ್ತು ಕುಂಟು ನೆಪ ವಡ್ಡಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿರುವುದು ಎಷ್ಟರಮಟ್ಟಿಗೆ ಸರಿ? ಎಂದಿರುವ ಅವರು ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ್ದಾರೆ.
ಕೊಪ್ಪಳ ವಿಶ್ವವಿದ್ಯಾಲಯ ಈಗ ತಾನೆ ಬೆಳೆಯುವ ಸಿರಿ ಮೊಳಕೆಯಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ, 40ಕ್ಕೂ ಹೆಚ್ಚು ಸಂಲಗ್ನತೆ ಕಾಲೇಜುಗಳನ್ನು ಹೊಂದಿರುವ 5000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕೊಪ್ಪಳ ವಿಶ್ವವಿದ್ಯಾಲಯ, ಬೆಳೆಯುವ ಹಂತದಲ್ಲಿದೆ.
ರಾಜ್ಯ ಸರ್ಕಾರದಲ್ಲಿ ಹಣಕಾಸಿನ ವ್ಯವಸ್ಥೆ ಸರಿ ಇಲ್ಲ ಅನ್ನುವುದಕ್ಕೆ ಇದೇ ಒಂದು ನಿರ್ದರ್ಶನ.
ನೂತನ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಜಾಗದ ವ್ಯವಸ್ಥೆಯನ್ನು ಮಾಡಿ, ಆರ್ಥಿಕವಾಗಿ ಸಹಾಯ ಮಾಡಬೇಕಾಗಿದ್ದ ಸ್ಥಳಿಯ ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿದ್ದು ದುರಂತದ ಸಂಗತಿ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ ಅವರೇ ಎಲ್ಲಿದ್ದೀರಿ?? ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ಪರಿಹಾರ ಕೊಡಿ ಎಂದು ಜಿಲ್ಲೆಯ ಜನಪ್ರತಿನಿಧಿಗಳನ್ನು ಪ್ರಶ್ನಿಸಿರುವರು.
ಹೋರಾಟ ಅನಿವಾರ್ಯ. ಕೊಪ್ಪಳ ವಿಶ್ವವಿದ್ಯಾಲಯ ಉಳಿಸಿಕೊಳ್ಳುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಮುಖಂಡ ನವೀನಕುಮಾರ ಗುಳಗಣ್ಣನವರ್ ಹೇಳಿದ್ದಾರೆ.